ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಒಬ್ಬ ಮಹಿಳಾ ಶಾಸಕರಿಗೂ ಸಚಿವ ಸ್ಥಾನ ನೀಡದಿರುವುದು ಮಹಿಳಾ ಸಮುದಾಯಕ್ಕೆ ಮಾಡಿದ ಅನ್ಯಾಯ ಮತ್ತು ಅವಮಾನ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿಕೆ ನೀಡಿದ್ದಾರೆ.

ಮಹಿಳಾ ಸಬಲೀಕರಣ, ಸಮಾನ ಅವಕಾಶ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಮಾತನಾಡುತ್ತಿದ್ದರೂ, ಸಚಿವ ಸಂಪುಟ ರಚನೆಯಲ್ಲಿ ಮಹಿಳೆಯರಿಗೆ ಅವಕಾಶ ಕಲ್ಪಿಸದಿರುವುದು ಅದರ ನಿಲುವಿನ ನೈಜ ಮುಖವನ್ನು ಬಯಲಿಗೆಳೆದಿದೆ ಎಂದು ಆರೋಪಿಸಿದ್ದಾರೆ.
ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಇಲ್ಲದಿರುವುದು ಕೇವಲ ಸಚಿವ ಸ್ಥಾನದಿಂದ ವಂಚಿಸಿದ ವಿಚಾರವಲ್ಲ; ಆಡಳಿತದ ಪ್ರಮುಖ ನಿರ್ಧಾರಗಳಲ್ಲಿ ಮಹಿಳೆಯರ ಧ್ವನಿಗೆ ಅವಕಾಶ ನಿರಾಕರಿಸಿದಂತಾಗಿದೆ. ರಾಜ್ಯದಲ್ಲಿ ಮಹಿಳೆಯರು ಶಿಕ್ಷಣ, ಉದ್ಯೋಗ, ಉದ್ಯಮ ಹಾಗೂ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡುತ್ತಿರುವ ಸಂದರ್ಭದಲ್ಲಿ, ಆಡಳಿತದ ಅತ್ಯುನ್ನತ ಮಟ್ಟದಲ್ಲೂ ಅವರಿಗೆ ಸಮರ್ಪಕ ಪ್ರಾತಿನಿಧ್ಯ ನೀಡಬೇಕಾಗಿತ್ತು ಎಂದು ಹೇಳಿದ್ದಾರೆ.

ಮಹಿಳಾ ಸಬಲೀಕರಣದ ಕುರಿತು ಭಾಷಣ ಮಾಡಿದರೆ‌ ಸಾಕಾಗುವುದಿಲ್ಲ.ಅಧಿಕಾರ ಹಂಚಿಕೆಯಲ್ಲಿ ಮಹಿಳೆಯರಿಗೆ ನ್ಯಾಯಯುತ ಅವಕಾಶ ಕಲ್ಪಿಸಿದಾಗ ಮಾತ್ರ ಮಹಿಳಾ ಪರ ಬದ್ಧತೆ ಸಾಬೀತಾಗುತ್ತದೆ. ಇಲ್ಲವಾದರೆ ಕಾಂಗ್ರೆಸ್‌ನ ಮಹಿಳಾ ಪರ ನಿಲುವು ಕೇವಲ ರಾಜಕೀಯ ಘೋಷಣೆಯಾಗಿಯೇ ಉಳಿಯಲಿದೆ ಎಂದು ರೂಪಾಲಿ ಎಸ್. ನಾಯ್ಕ ತಿಳಿಸಿದ್ದಾರೆ.

ಜಿಲ್ಲೆಯನ್ನೂ ಕಡೆಗಣಿಸಲಾಗಿದೆ
ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಗಂಭೀರ ಸಮಸ್ಯೆಗಳು ಬಗೆಹರಿಯಬೇಕಿದೆ. ಇಂತಹ ಸಂದರ್ಭದಲ್ಲಿ ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡದಿರುವುದು ಜಿಲ್ಲೆಯ ಜನರ ಆಶಯಗಳಿಗೆ ಧಕ್ಕೆ ತಂದಂತಾಗಿದೆ. ಕಾಂಗ್ರೆಸ್ ಸರ್ಕಾರ ಉತ್ತರ ಕನ್ನಡ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಅದರ ನಿರ್ಲಕ್ಷ್ಯದ ಮನೋಭಾವಕ್ಕೆ ಸಾಕ್ಷಿಯಾಗಿದೆ. ಸಚಿವ ಸ್ಥಾನ ಘೋಷಣೆ ಮಾಡಿ‌ ಕೊನೆ ಕ್ಷಣದಲ್ಲಿ ಕಸಿದುಕೊಳ್ಳುವ ಮೂಲಕ ಕಾಂಗ್ರೆಸ್ ದ್ರೋಹ ಬಯಲಾಗಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ/ ಘರ್ ತಿರಂಗಾ’ ಅಭಿಯಾನಕ್ಕೆ ರಾಜ್ಯ ಸಂಚಾಲಕಿಯಾಗಿ ರೂಪಾಲಿ ನಾಯ್ಕ