ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ: ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ತನಿಖೆಯ ಮುಂದುವರಿದ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವಂದಿಗೆ ಸಮೀಪದ ಹೊನ್ನಾರಕ ದೇವಸ್ಥಾನದ ಬಳಿಯಿರುವ ಬೇಲೇಕೇರಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಸಿಕಂದರ್ ಚೌದರಿ ಅವರ ನಿವಾಸಕ್ಕೆ ಇಡಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎನ್ನಲಾಗಿದೆ.

ಕೆಪಿಎಸ್‌ಸಿ ಪರೀಕ್ಷೆಯ ಒಎಂಆರ್ ಶೀಟ್‌ಗಳಿಗೆ ಸಂಬಂಧಿಸಿದ ಅಕ್ರಮದಲ್ಲಿ ಸಿಕಂದರ್ ಚೌದರಿ ಅವರ ಹೆಸರು ಕೇಳಿಬಂದಿತ್ತು ಎನ್ನಲಾಗಿದ್ದು, ಇದೇ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರ ನಿವಾಸದಲ್ಲಿ ದಾಖಲೆಗಳು ಹಾಗೂ ಇತರ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಪ್ರಕರಣದ ತನಿಖೆ ಸಂದರ್ಭದಲ್ಲಿ ಸಿಕಂದರ್ ಚೌದರಿ ಅವರನ್ನು ಈ ಹಿಂದೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು ಎನ್ನಲಾಗಿದ್ದು, ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ತಿಳಿದುಬಂದಿದೆ.

ಕೆಪಿಎಸ್‌ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ಇಡಿ ಅಧಿಕಾರಿಗಳು ಹಲವು ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ. ಅದರ ಭಾಗವಾಗಿ ಅಂಕೋಲಾದಲ್ಲಿಯೂ ದಾಳಿ ನಡೆದಿದೆ ಎನ್ನಲಾಗಿದೆ.
ಅಧಿಕಾರಿಗಳ ಪರಿಶೀಲನೆ ಮುಂದುವರಿದಿದ್ದು, ದಾಳಿಯ ವೇಳೆ ಏನೇನು ದಾಖಲೆಗಳು ಪತ್ತೆಯಾಗಿವೆ ಹಾಗೂ ತನಿಖೆಯಲ್ಲಿ ಯಾವ ಅಂಶಗಳು ಬೆಳಕಿಗೆ ಬಂದಿವೆ ಎಂಬುದರ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಇದನ್ನೂ ಓದಿ /ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಸಿಬ್ಬಂದಿಗಳ ಮೊಬೈಲ್ ವಶಕ್ಕೆ