ಸುದ್ದಿಬಿಂದು ಬ್ಯೂರೋ ವರದಿ

ಬೆಂಗಳೂರು : ಮಾಜಿ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ.ನಾಗೇಶ್ (67) ಅವರು ಮಂಗಳವಾರ ಬೆಂಗಳೂರಿನಲ್ಲಿ ನಿಧನರಾದರು.ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿರುವ ಪುತ್ರಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ನಾಗೇಶ್ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರ ಅಂತ್ಯಕ್ರಿಯೆ ಬುಧವಾರ ಸ್ವಕ್ಷೇತ್ರ ತಿಪಟೂರಿನಲ್ಲಿ ನಡೆಯಲಿದೆ. ಬಿ.ಸಿ. ನಾಗೇಶ್ ಅವರು ತಿಪಟೂರು ವಿಧಾನಸಭಾ ಕ್ಷೇತ್ರದಿಂದ 2008 ಹಾಗೂ 2018ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದ್ದರು.

ಸಚಿವರಾಗಿದ್ದ ಅವಧಿಯಲ್ಲಿ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಹಾಗೂ ಶಿಸ್ತು ಪಾಲನೆಗೆ ಒತ್ತು ನೀಡಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ನೈತಿಕ ಮೌಲ್ಯಗಳಿಗೆ ಆದ್ಯತೆ ನೀಡುವ ಉದ್ದೇಶದಿಂದ ಶಾಲಾ ಪ್ರಾರ್ಥನೆ ಸೇರಿದಂತೆ ಹಲವು ಕ್ರಮಗಳನ್ನು ಜಾರಿಗೆ ತಂದಿದ್ದರು.

ಬಿ.ಇ. ಪದವೀಧರರಾಗಿದ್ದ ನಾಗೇಶ್ ಅವರು ತಮ್ಮ ಸಾರ್ವಜನಿಕ ಜೀವನವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪೂರ್ಣಕಾಲಿಕ ಕಾರ್ಯಕರ್ತರಾಗಿ ಆರಂಭಿಸಿದ್ದರು. ಸರಳ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದ ಅವರು ಶಿಕ್ಷಣ ಕ್ಷೇತ್ರದಲ್ಲಿ ಹಲವು ಮಹತ್ವದ ನಿರ್ಧಾರಗಳ ಮೂಲಕ ಗಮನ ಸೆಳೆದಿದ್ದರು. ಮೃತರು ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.