ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಕುಮಟಾ ಕೆಎಸ್ಆರ್ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ನಡೆದ ಜೇಬುಗಳ್ಳತನ ಪ್ರಕರಣವನ್ನು ಕುಮಟಾ ಪೊಲೀಸರು ಕೇವಲ 9 ದಿನಗಳಲ್ಲಿ ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವು ಮಾಡಲಾಗಿದ್ದ 20.180 ಗ್ರಾಂ ತೂಕದ, ಅಂದಾಜು ₹2.60 ಲಕ್ಷ ಮೌಲ್ಯದ ಬಂಗಾರದ ಮಾಂಗಲ್ಯ ಸರವನ್ನು ವಶಪಡಿಸಿಕೊಂಡಿದ್ದಾರೆ.
ಕುಮಟಾ ತಾಲೂಕಿನ ಚಿಕ್ಕೊಳ್ಳಿ, ಹವ್ಯಕ ಕಲ್ಯಾಣ ಮಂಟಪದ ಹಿಂಭಾಗದ ನಿವಾಸಿ ಭಾರತಿ ಶಿವು ನಾಯಕ (59) ಅವರು ಆರೋಗ್ಯ ಕಾರ್ಯಕರ್ತೆಯಾಗಿದ್ದು, ಆ.18ರಂದು ಮಧ್ಯಾಹ್ನ 1.45 ರಿಂದ 2 ಗಂಟೆಯ ನಡುವಿನ ಅವಧಿಯಲ್ಲಿ ಕುಮಟಾ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಹಳೆ ಬಸ್ ನಿಲ್ದಾಣದ ಕಡೆಗೆ ತೆರಳಲು ಬಸ್ ಹತ್ತುತ್ತಿದ್ದರು. ಈ ವೇಳೆ ಜನಜಂಗುಳಿಯ ಲಾಭ ಪಡೆದ ಕಳ್ಳರು ಅವರ ಗಮನಕ್ಕೆ ಬಾರದಂತೆ ವ್ಯಾನಿಟಿ ಬ್ಯಾಗ್ನಲ್ಲಿದ್ದ ಪರ್ಸ್ನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಪರ್ಸ್ನಲ್ಲಿ ಮಾಂಗಲ್ಯ ಸರವಿತ್ತು.
ಈ ಕುರಿತು ಸಂತ್ರಸ್ತೆ ಆ.19ರಂದು ಸಂಜೆ 5.35ಕ್ಕೆ ಕುಮಟಾ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕುಮಟಾ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.165/2026, ಬಿಎನ್ಎಸ್ ಕಲಂ 303(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
100ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳ ಪರಿಶೀಲನೆ
ಕುಮಟಾ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಈ ರೀತಿಯ ಸಣ್ಣಪುಟ್ಟ ಜೇಬುಗಳ್ಳತನ ಪ್ರಕರಣಗಳು ಆಗಾಗ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ತನಿಖಾ ತಂಡವು ಕುಮಟಾ ಪಟ್ಟಣ ಹಾಗೂ ತಾಲೂಕಿನ ವಿವಿಧೆಡೆ ಅಳವಡಿಸಲಾಗಿರುವ 100ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಗಂಟೆಗಟ್ಟಲೆ ಪರಿಶೀಲಿಸಿತು.
ಘಟನೆ ನಡೆದ ಸಮಯದಲ್ಲಿ ಬಸ್ ನಿಲ್ದಾಣದಲ್ಲಿದ್ದ ಶಂಕಿತ ವ್ಯಕ್ತಿಗಳ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಿದ ಪೊಲೀಸರು, ಹಂತ ಹಂತವಾಗಿ ಆರೋಪಿಗಳ ಗುರುತು ಹಾಗೂ ಅವರ ವಾಸಸ್ಥಳದ ಕುರಿತು ಖಚಿತ ಮಾಹಿತಿ ಸಂಗ್ರಹಿಸುವಲ್ಲಿ ಯಶಸ್ವಿಯಾದರು.
ದಾಳಿ ನಡೆಸಿ ಇಬ್ಬರ ಬಂಧನ
ಸಂಗ್ರಹಿಸಿದ ಖಚಿತ ಮಾಹಿತಿಯ ಆಧಾರದ ಮೇಲೆ ಆ.28ರಂದು ಬೆಳಗ್ಗೆ ಕುಮಟಾ ತಾಲೂಕಿನ ಬಡಾಳ, ಸೊಪ್ಪಿನಹೊಸಳ್ಳಿ ಪ್ರದೇಶದಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದರು.
ಬಂಧಿತರನ್ನು ಬಡಾಳದ ಪ್ರಾಟ್ ಕೇರಿಯ ಸೀಮಾಬಾನು ಕೋಂ ಜಾವಿದ ಸಾಬ, ಕೂಲಿ ಹಾಗೂ ಮೂಲತಃ ಹೊನ್ನಾವರ ತಾಲೂಕಿನ ಮಂಕಿ ಮಾವಿನಕಟ್ನಾದವರಾದ, ಸೊಪ್ಪಿನಹೊಸಳ್ಳಿ ನಿವಾಸಿ ಶಮ್ಮಾ ಬುಡಿಯಾ ಕೋಂ ಮೊಹಮ್ಮದ್ ಫಿರ್ದೋಸ್, ಮನೆಗೆಲಸದವರು ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಅವರಿಂದ ಕಳುವಾಗಿದ್ದ 20.180 ಗ್ರಾಂ ತೂಕದ, ಅಂದಾಜು ₹2.60 ಲಕ್ಷ ಮೌಲ್ಯದ ಬಂಗಾರದ ಕರಿಮಣಿ ಸರವನ್ನು ಪೊಲೀಸರು ಸಂಪೂರ್ಣವಾಗಿ ವಶಪಡಿಸಿಕೊಂಡಿದ್ದಾರೆ.
ತನಿಖಾ ತಂಡಕ್ಕೆ ಹಿರಿಯ ಅಧಿಕಾರಿಗಳ ಶ್ಲಾಘನೆ
ಪ್ರಕರಣದ ಯಶಸ್ವಿ ಭೇದನೆಯಲ್ಲಿ ಕುಮಟಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಯೋಗೇಶ ಕೆ.ಎಂ. ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಾವಿತ್ರಿ ನಾಯಕ ಹಾಗೂ ಸಿಬ್ಬಂದಿಗಳಾದ ಗಣೇಶ ನಾಯ್ಕ, ದಯಾನಂದ ನಾಯ್ಕ, ಕಿರಣ ನಾಯ್ಕ ಮತ್ತು ಗುರು ನಾಯಕ ಅವರು ಹಗಲಿರುಳು ಶ್ರಮಿಸಿದ್ದಾರೆ.
ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಕುಮಟಾ ಪೊಲೀಸರ ಕಾರ್ಯವನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಕೃಷ್ಣಮೂರ್ತಿ ಹಾಗೂ ಭಟ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ. ಗಿರೀಶ್ ಅವರು ಶ್ಲಾಘಿಸಿ, ತನಿಖಾ ತಂಡವನ್ನು ಅಭಿನಂದಿಸಿದ್ದಾರೆ.
ಜನಜಂಗುಳಿ ಪ್ರದೇಶಗಳಲ್ಲಿ ಎಚ್ಚರ ವಹಿಸಲು ಮನವಿ
ಬಸ್ ನಿಲ್ದಾಣ, ಮಾರುಕಟ್ಟೆ ಸೇರಿದಂತೆ ಜನಜಂಗುಳಿ ಪ್ರದೇಶಗಳಲ್ಲಿ ಸಾರ್ವಜನಿಕರು ತಮ್ಮ ಬೆಲೆಬಾಳುವ ವಸ್ತುಗಳು ಹಾಗೂ ಹಣ-ಆಭರಣಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಇಂತಹ ಯಾವುದೇ ಘಟನೆಗಳು ಕಂಡುಬಂದಲ್ಲಿ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕುಮಟಾ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

