ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು : ಕನ್ನಡ ಚಿತ್ರರಂಗದ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರ ಮುಂದಿನ ಹೆಜ್ಜೆ ಇದೀಗ ರಾಜಕೀಯದತ್ತ ಇರಬಹುದೇ ಎಂಬ ಚರ್ಚೆ ಗಾಂಧಿನಗರದಲ್ಲಿ ಶುರುವಾಗಿದೆ. ಕಾಂಗ್ರೆಸ್ ನ ಮೂಲಕ ಅವರನ್ನು ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಮಾತುಗಳು ಕೇಳಿಬರುತ್ತಿದ್ದು ರವಿಮಾನ ಸಿನಿಮಾರಂಗದಿಂದ ರಾಜಕೀಯಕ್ಕೆ ಎಂಟ್ರಿ ಕೊಡುವುದು ಬಹುತೇಕ ಫೀಕ್ಸ್ ಎನ್ನಲಾಗಿದ್ದು,
ಸಿನಿಮಾ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರ್ಮಾಪಕ, ಕಥೆಗಾರ, ಚಿತ್ರಕಥೆಗಾರ ಹಾಗೂ ಸಂಗೀತ ನಿರ್ದೇಶಕರಾಗಿ ತಮ್ಮದೇ ಆದ ಛಾಪು ಮೂಡಿಸಿರುವ ರವಿಚಂದ್ರನ್, ಹಲವು ದಶಕಗಳಿಂದ ಕನ್ನಡ ಸಿನಿರಸಿಕರ ಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದಾರೆ. ಇದೀಗ ಅವರ ರಾಜಕೀಯ ಪ್ರವೇಶದ ಕುರಿತು ಕೇಳಿಬರುತ್ತಿರುವ ಮಾತುಗಳು ಕುತೂಹಲಕ್ಕೆ ಕಾರಣವಾಗಿವೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಾಲ್ಯ ಸ್ನೇಹಿತರಾಗಿರುವ ರವಿಚಂದ್ರನ್ ಇಬ್ಬರೂ ಶಾಲಾ ದಿನಗಳಿಂದಲೂ ಪರಿಚಿತರಾಗಿದ್ದು, ಇಂದಿಗೂ ಆತ್ಮೀಯ ಸ್ನೇಹವನ್ನು ಮುಂದುವರಿಸಿಕೊಂಡಿದ್ದಾರೆ ಎನ್ನಲಾಗುತ್ತದೆ. ಈ ಸ್ನೇಹದ ಹಿನ್ನೆಲೆಯಲ್ಲಿ ರವಿಚಂದ್ರನ್ ಅವರನ್ನು ಕಾಂಗ್ರೆಸ್ನಿಂದ ವಿಧಾನ ಪರಿಷತ್ಗೆ ಕರೆತರುವ ಕುರಿತು ಚರ್ಚೆ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಕುರಿತು ಕಾಂಗ್ರೆಸ್ ಆಗಲಿ, ರವಿಚಂದ್ರನ್ ಅವರಾಗಲಿ ಇದುವರೆಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.
ಹೀಗಾಗಿ ಕ್ರೇಜಿಸ್ಟಾರ್ ರಾಜಕೀಯಕ್ಕೆ ಪ್ರವೇಶಿಸುತ್ತಾರೆಯೇ? ಕಾಂಗ್ರೆಸ್ನಿಂದ ವಿಧಾನ ಪರಿಷತ್ ಸದಸ್ಯರಾಗುತ್ತಾರೆಯೇ? ಎಂಬ ಪ್ರಶ್ನೆಗಳಿಗೆ ಸದ್ಯಕ್ಕೆ ಉತ್ತರ ಸಿಕ್ಕಿಲ್ಲ. ಆದರೆ ರವಿಚಂದ್ರನ್ ಅವರ ರಾಜಕೀಯ ಪ್ರವೇಶದ ಕುರಿತ ಚರ್ಚೆ ಮಾತ್ರ ಗಾಂಧಿನಗರದಿಂದ ರಾಜಕೀಯ ವಲಯದವರೆಗೂ ಸಾಕಷ್ಟು ಕುತೂಹಲ ಮೂಡಿಸಿದೆ.

