ಸುದ್ದಿಬಿಂದು ಬ್ಯೂರೋ ವರದಿ
ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಮಾಡುತ್ತಿದ್ದ ವೇಳೆ 9ನೇ ತರಗತಿ ವಿದ್ಯಾರ್ಥಿ ಓರ್ವ ಶಾಲೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ನಡೆದಿದೆ.
ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿಯಲ್ಲಿ ಓದುತ್ತಿದ್ದ 14 ವರ್ಷದ ವೀರಮಣಿ ಮೃತಪಟ್ಟ ಬಾಲಕ. ಬುಧವಾರ ಮಧ್ಯಾಹ್ನ ಶಾಲೆಯಲ್ಲಿ ಸಹಪಾಠಿಗಳೊಂದಿಗೆ ಬಿಸಿಯೂಟ ಮಾಡುತ್ತಿದ್ದ ಸಂದರ್ಭದಲ್ಲಿ ಆತನಿಗೆ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದೆ. ಕೆಲವೇ ಕ್ಷಣಗಳಲ್ಲಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾನೆ.
ವಿದ್ಯಾರ್ಥಿ ಕುಸಿದು ಬಿದ್ದಿರುವುದನ್ನು ಗಮನಿಸಿದ ಶಿಕ್ಷಕರು ತಕ್ಷಣವೇ ಆತನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಬಾಲಕನ ಸ್ಥಿತಿ ಗಂಭೀರವಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಬಳಿಕ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಯಿತು. ಆದರೆ ವೈದ್ಯರ ಪ್ರಯತ್ನದ ನಡುವೆಯೂ ಬಾಲಕನ ಜೀವ ಉಳಿಸಲಾಗಲಿಲ್ಲ. ಹೃದಯಾಘಾತವೇ ಸಾವಿಗೆ ಕಾರಣವೆಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಬಾಲಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರು, ಶಿಕ್ಷಕರು ಹಾಗೂ ಸಹಪಾಠಿಗಳಲ್ಲಿ ದುಃಖ ಮಡುಗಟ್ಟಿದೆ.



