ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ತಾಲೂಕಿನ ಬಿಸಲಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡೆಬೈಲ್ ಗ್ರಾಮದ ರೈತರು ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ನಷ್ಟ ಅನುಭವಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿವರ್ಷ ಅರಣ್ಯ ಇಲಾಖೆಯ ಗಮನಕ್ಕೆ ಸಮಸ್ಯೆ ತಂದರೂ ಯಾವುದೇ ಶಾಶ್ವತ ಪರಿಹಾರ ದೊರೆಯುತ್ತಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೂಡೆಬೈಲ್ ಗ್ರಾಮದ ಬಹುತೇಕ ರೈತ ಕುಟುಂಬಗಳು ಅಲ್ಪ ಪ್ರಮಾಣದ ಜಮೀನಿನಲ್ಲಿ ಭತ್ತ, ಕಬ್ಬು, ಬಾಳೆ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಕೃಷಿಯ ಜೊತೆಗೆ ಕೂಲಿ ಕೆಲಸ ಮಾಡಿಕೊಂಡು ಮಕ್ಕಳ ವಿದ್ಯಾಭ್ಯಾಸ ಹಾಗೂ ಕುಟುಂಬದ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಕಳೆದ ಕೆಲವು ವರ್ಷಗಳಿಂದ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಕಷ್ಟಪಟ್ಟು ಬೆಳೆದ ಬೆಳೆಗಳು ಕೈಗೆ ಬರುವ ಮುನ್ನವೇ ನಾಶವಾಗುತ್ತಿರುವುದು ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ಈ ವರ್ಷವೂ ಕಾಡುಹಂದಿಗಳು ಹಾಗೂ ಕಾಡುಕೋಣಗಳು ಜಮೀನಿಗೆ ನುಗ್ಗಿ ಕಬ್ಬು, ಭತ್ತ ಮತ್ತು ಬಾಳೆ ಬೆಳೆಗಳನ್ನು ಹಾನಿ ಮಾಡುತ್ತುದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾನಿಯ ಕುರಿತು ಪ್ರತಿವರ್ಷ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತಿದ್ದು, ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಅಧಿಕಾರಿಗಳು ಹೇಳಿ ರೈತರ ಜಮೀನಿನ ದಾಖಲೆಗಳನ್ನು ಪಡೆದುಕೊಂಡು ಹೋಗುತ್ತಾರೆ. ಆದರೆ ಇದುವರೆಗೂ ಯಾವುದೇ ಪರಿಹಾರ ದೊರೆತಿಲ್ಲ ಎಂದು ರೈತರು ಆರೋಪಿಸುತ್ತಿದ್ದಾರೆ.
ಈ ಬಾರಿಯೂ ಬೆಳೆ ಹಾನಿ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರೂ, ಪರಿಹಾರ ‘ಇಂದು ಬರುತ್ತದೆ, ನಾಳೆ ಬರುತ್ತದೆ’ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಹೊರತು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ರೈತರು ಆರೋಪಿಸಿದ್ದಾರೆ.
“ನಮ್ಮದು ಚಿಕ್ಕ ಗ್ರಾಮ ಎಂಬ ಕಾರಣಕ್ಕೆ ಅಧಿಕಾರಿಗಳು ಸಮಸ್ಯೆಯನ್ನು ನಿರ್ಲಕ್ಷಿಸುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಇದೇ ಪರಿಸ್ಥಿತಿ ಮುಂದುವರಿದರೆ ರೈತ ಕುಟುಂಬಗಳ ಬದುಕು ಹಾಗೂ ಮಕ್ಕಳ ಭವಿಷ್ಯ ಏನಾಗಬೇಕು ಎಂಬುದು ತಿಳಿಯುತ್ತಿಲ್ಲ” ಎಂದು ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆ ಹಾಗೂ ಇತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಬೆಳೆ ಹಾನಿಯನ್ನು ಪರಿಶೀಲಿಸಿ, ಅರ್ಹ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಕಾಡುಪ್ರಾಣಿಗಳ ಹಾವಳಿ ನಿಯಂತ್ರಿಸಲು ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಗಣಪತಿ ಗೌಡ, ಶ್ರೀಕಾಂತ್ ನಾಯ್ಕ, ಗಂಗಾಧರ್ ಗೌಡ, ಶಕುಂತಲಾ ಪರಮೇಶ್ವರ್ ನಾಯ್ಕ ಹಾಗೂ ರಾಜು ಗಣಪತಿ ಗೌಡ ಸೇರಿದಂತೆ ಸ್ಥಳೀಯ ರೈತರು ಆಗ್ರಹಿಸಿದ್ದಾರೆ.

