ಸುದ್ದಿಬಿಂದು ಬ್ಯೂರೋ ವರದಿ

ಕುಮಟಾ: ಕಾಣೆಯಾಗಿದ್ದ ಸುಮಾರು 42 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ಘಟನೆ ನಡೆದ ಕೇವಲ 30 ನಿಮಿಷಗಳೊಳಗೆ ಪತ್ತೆಹಚ್ಚಿ ವಾರಸುದಾರರಿಗೆ ಸುರಕ್ಷಿತವಾಗಿ ಹಸ್ತಾಂತರಿಸುವ ಮೂಲಕ ಕುಮಟಾ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ಹಾಗೂ ಕರ್ತವ್ಯನಿಷ್ಠೆ ಮೆರೆದಿದ್ದಾರೆ.

ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷ್ಣಪುರ, ರಂಗನಕೆರೆ, ಹನೇಹಳ್ಳಿ ನಿವಾಸಿ ಶ್ರೀಮತಿ ಸುಪ್ರಿಯ (36), ಪತಿ ಪ್ರದೀಪ್ ಅವರು ಕುಟುಂಬದೊಂದಿಗೆ ಶಿರಸಿಯ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ತೆರಳಲು ಸೆ. 3ರಂದು ಬ್ರಹ್ಮಾವರ ರೈಲು ನಿಲ್ದಾಣದಿಂದ ರೈಲಿನಲ್ಲಿ ಪ್ರಯಾಣಿಸಿ ಸಂಜೆ ಸುಮಾರು 5.30ಕ್ಕೆ ಕುಮಟಾ ರೈಲು ನಿಲ್ದಾಣಕ್ಕೆ ಆಗಮಿಸಿದ್ದರು.

ಬಳಿಕ ಶಿರಸಿಗೆ ತೆರಳಲು ಕುಮಟಾ ಬಸ್ ನಿಲ್ದಾಣಕ್ಕೆ ಬಂದು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಸುಪ್ರಿಯ ಅವರ ಕತ್ತಿನಲ್ಲಿದ್ದ ಸುಮಾರು 42 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರ ಕಾಣೆಯಾಗಿರುವುದು ಅವರ ತಾಯಿಯ ಗಮನಕ್ಕೆ ಬಂದಿದೆ. ತಕ್ಷಣ ಕುಟುಂಬಸ್ಥರು ಕುಮಟಾ ಪೊಲೀಸ್ ಠಾಣೆಗೆ ತೆರಳಿ ವಿಷಯ ತಿಳಿಸಿದರು.

ಮಾಹಿತಿ ಪಡೆದ ಕೂಡಲೇ ಕುಮಟಾ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬಸ್ ನಿಲ್ದಾಣದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಸಹಕಾರದೊಂದಿಗೆ ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಘಟನೆ ನಡೆದ ಸುಮಾರು 30 ನಿಮಿಷಗಳೊಳಗೆ ಕಾಣೆಯಾಗಿದ್ದ ಚಿನ್ನದ ಸರವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು.

ಪತ್ತೆಯಾದ ಮಾಂಗಲ್ಯ ಸರವನ್ನು ಬಳಿಕ ಸಂತ್ರಸ್ತೆ ಸುಪ್ರಿಯ ಅವರಿಗೆ ಸುರಕ್ಷಿತವಾಗಿ ಹಸ್ತಾಂತರಿಸಲಾಯಿತು. ಚಿನ್ನದ ಸರ ಕಾಣೆಯಾಗಿದ್ದರಿಂದ ಆತಂಕಕ್ಕೊಳಗಾಗಿದ್ದ ಕುಟುಂಬಸ್ಥರು ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಈ ಕಾರ್ಯಾಚರಣೆಯಲ್ಲಿ ಕುಮಟಾ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ಗಣೇಶ್ ನಾಯ್ಕ್, ದಯಾನಂದ ನಾಯ್ಕ್, ಕಿರಣ್ ನಾಯ್ಕ್ ಹಾಗೂ ಗುರು ನಾಯಕ್ ಮತ್ತು ಕೆಎಸ್‌ಆರ್‌ಟಿಸಿ ಅಧಿಕಾರಿಗಳಾದ ಗಂಗಾಧರ ವೈದ್ಯ ಹಾಗೂ ಉದಯ ಹಾದಿಮನಿ ಅವರು ಸಹಕರಿಸಿದರು.

ಪೊಲೀಸರು ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಸಮಯಪ್ರಜ್ಞೆ, ಕರ್ತವ್ಯನಿಷ್ಠೆ ಮತ್ತು ಕ್ಷಿಪ್ರ ಕಾರ್ಯವೈಖರಿಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ /ಕಾರವಾರ ಶೈಕ್ಷಣಿಕ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ; ಈ ಬಾರಿ ಗೌರವದ ಗರಿ ಯಾರಿಗೆ?