ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ಕಸ್ತೂರಿ ರಂಗನ್ ವರದಿಯ 7ನೇ ಅಧಿಸೂಚನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 567 ಗ್ರಾಮಗಳನ್ನು ಅತೀ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಿರುವುದು ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದ್ದರಿಂದ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವಂತೆ ಆಗ್ರಹಿಸಿ ಸಹಸ್ರಾರು ಆಕ್ಷೇಪ ಪತ್ರಗಳನ್ನು ಸಲ್ಲಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.
ಕಸ್ತೂರಿ ರಂಗನ್ ವರದಿ ವಿರೋಧಿಸಿ ಹಮ್ಮಿಕೊಂಡಿರುವ ‘ಒಂದು ಲಕ್ಷ ಆಕ್ಷೇಪ ಪತ್ರ’ ಅಭಿಯಾನದ ಅಂಗವಾಗಿ ಶಿರಸಿ ನಗರಸಭೆಯ ಬಯಲು ರಂಗಮಂದಿರದಲ್ಲಿ ನಡೆದ ಬೃಹತ್ ಸಭೆಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯ ವ್ಯಾಪ್ತಿಗೆ ಬರುವ ಜನವಸತಿ ಪ್ರದೇಶಗಳನ್ನು ಸಂಪೂರ್ಣವಾಗಿ ಮುಕ್ತಗೊಳಿಸಬೇಕು. ಅಲ್ಲದೆ, ಸೂಕ್ಷ್ಮ ಪ್ರದೇಶಗಳ ಕುರಿತು ಸಮಗ್ರ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಿ, ವೈಜ್ಞಾನಿಕ ಹಾಗೂ ತಾಂತ್ರಿಕ ಅಂಶಗಳ ಆಧಾರದ ಮೇಲೆ ಕೇಂದ್ರ ಸರ್ಕಾರಕ್ಕೆ ಆಕ್ಷೇಪ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಪರಿಸರ ಇಲಾಖೆಯು ಪ್ರಕಟಿಸಿರುವ ಸೂಕ್ಷ್ಮ ಪ್ರದೇಶದ ಅಧಿಸೂಚನೆಯು ಅವೈಜ್ಞಾನಿಕವಾಗಿದ್ದು, ಇದರಿಂದ ಜನಜೀವನಕ್ಕೆ ತೊಂದರೆಯಾಗುವುದರ ಜತೆಗೆ ಅರಣ್ಯವಾಸಿಗಳಲ್ಲಿ ಅಭದ್ರತೆ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯ ಸರ್ಕಾರವು ಈ ಕುರಿತು ಪ್ರಬಲವಾಗಿ ಆಕ್ಷೇಪ ವ್ಯಕ್ತಪಡಿಸಿ,ಅಧಿಸೂಚನೆಯಲ್ಲಿರುವ ಅವೈಜ್ಞಾನಿಕ ಅಂಶಗಳನ್ನು ವೈಜ್ಞಾನಿಕ ಮತ್ತು ತಾಂತ್ರಿಕ ದಾಖಲೆಗಳೊಂದಿಗೆ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು ಎಂದು ಅವರು ಆಗ್ರಹಿಸಿದರು.
ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾದ ಗ್ರಾಮಗಳ ಗ್ರಾಮಸಭೆಗಳಲ್ಲಿ ಈ ಕುರಿತು ನಿರ್ಣಯ ಕೈಗೊಂಡು, ಅಲ್ಲಿನ ಸ್ಥಳೀಯ ಜನಜೀವನ, ಕೃಷಿ, ಅರಣ್ಯ ಅವಲಂಬನೆ ಹಾಗೂ ಸಾಮಾಜಿಕ ವ್ಯವಸ್ಥೆಯ ಕುರಿತ ಸಮಗ್ರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ರವೀಂದ್ರ ನಾಯ್ಕ ಒತ್ತಾಯಿಸಿದರು.
ಸಭೆಯಲ್ಲಿ ಮಹಾಬಲೇಶ್ವರ ನಾಯ್ಕ ಬೇಡ್ಕಣಿ ಸ್ವಾಗತಿಸಿದರು. ಶೋಭಾ ನಾಯ್ಕ, ಎಸ್.ಎನ್. ಹೆಗಡೆ, ರಾಘು ಗುಡ್ಡಾಪುರ, ಶ್ರೀಧರ ಹೆಗಡೆ, ನಾಗಪತಿ ಗೌಡ ಹುಕ್ಕಳ್ಳಿ ಹಾಗೂ ಕಿರಣ ಮರಾಠಿ ದೇವನಳ್ಳಿ ಮಾತನಾಡಿದರು.
ಜಿಲ್ಲಾ ಸಂಚಾಲಕ ಇಬ್ರಾಹೀಂ ಗೌಡಳ್ಳಿ, ಮುಂಡಗೋಡ ಅಧ್ಯಕ್ಷ ಶಿವಾನಂದ ಜೋಗಿ, ಕೆ.ಟಿ. ನಾಯ್ಕ, ರಾಜು ನರೇಬೈಲ್, ಅಣ್ಣಪ್ಪ ನಾಯ್ಕ ಕಣ್ಣಿಗೇರಿ, ಆರ್.ಟಿ. ನಾಯ್ಕ ವಾಜಗೋಡ, ಸ್ವಾತಿ ಜೈನ್, ಮಲ್ಲೇಶಿ, ಸತೀಶ್ ನಾಯ್ಕ ತ್ಯಾಗಲಿ, ಲಕ್ಷ್ಮಣ ನಾಯ್ಕ, ಕಲ್ಪನಾ ನರೇಬೈಲ್, ಯಶೋಧಾ ನೌಟೂರು ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

