ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ: ಎಮ್ಮೆ ಮೇಯಿಸಿಕೊಂಡು ಮನೆಗೆ ಮರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಪಣಸೋಲೆ ಸಮೀಪ ನಡೆದಿದೆ.
ಪಣಸೋಲೆ ಸಮೀಪದ ನಿವಾಸಿ ಅಪ್ಪು ಬೊಮ್ಮ ಪಿಂಗಳೆ ಎಂಬುವವರು ಎಮ್ಮೆ ಮೇಯಿಸಿಕೊಂಡು ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಏಕಾಏಕಿ ಎದುರಾದ ಕರಡಿ ಅವರ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಯಲ್ಲಿ ಅವರ ಸೊಂಟ, ಬೆನ್ನು ಹಾಗೂ ಕೈ ಭಾಗಕ್ಕೆ ಗಾಯಗಳಾಗಿವೆ.
ಘಟನೆಯ ಬಳಿಕ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಗಾಯಾಳುವನ್ನು ತಕ್ಷಣ ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪಣಸೋಲೆ ಸುತ್ತಮುತ್ತ ಕರಡಿ ಓಡಾಟ ಮತ್ತು ದಾಳಿ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಪ್ರದೇಶದಂಚಿನಲ್ಲಿ ಕರಡಿ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಓಡಾಡುವಂತಾಗಿದೆ.
ದಾಂಡೇಲಿ ತಾಲೂಕಿನಲ್ಲಿ ಒಂದೇ ವಾರದ ಅವಧಿಯಲ್ಲಿ ಕರಡಿ ದಾಳಿಯ ಎರಡನೇ ಘಟನೆ ಇದಾಗಿದ್ದು, ಅರಣ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

