ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ; ಸಾರ್ವಜನಿಕ ಸುವ್ಯವಸ್ಥೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಡಿಜೆ ವ್ಯವಸ್ಥೆ, ಬೇಸ್ ಬೂಸ್ಟರ್‌, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್‌ಗಿಂತ ಅಧಿಕ ಶಬ್ದ ಉಂಟುಮಾಡುವ ಶಬ್ದವರ್ಧಕ ಸಾಧನಗಳ ಬಳಕೆಯನ್ನು ಮುಂದಿನ ಆದೇಶದವರೆಗೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮಗಳು) ನಿಯಮಗಳು, 2000 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್), 2023ರ ಕಲಂ 163ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.ವಸತಿ ಪ್ರದೇಶಗಳು, ಸೈಲೆಂಟ್ ಝೋನ್‌ಗಳಾದ ಆಸ್ಪತ್ರೆ, ಶಾಲೆ, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳ 100 ಮೀಟರ್ ವ್ಯಾಪ್ತಿಯಲ್ಲಿ ಡಿಜೆ ಹಾಗೂ ಹೆಚ್ಚಿನ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದಲ್ಲದೆ ಇಳಿಜಾರು ರಸ್ತೆಗಳು, ಸಂಚಾರ ದಟ್ಟಣೆ ಇರುವ ಪ್ರದೇಶಗಳು ಹಾಗೂ ಸಮುದಾಯ ಸೂಕ್ಷ್ಮ ಪ್ರದೇಶಗಳಲ್ಲಿಯೂ ಇಂತಹ ಶಬ್ದ ಸಾಧನಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ.

ಅಲ್ಲದೆ ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಡಿಜೆ ಸೇರಿದಂತೆ ಹೆಚ್ಚಿನ ಶಬ್ದ ಉಂಟುಮಾಡುವ ಯಾವುದೇ ಶಬ್ದವರ್ಧಕ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆ ಅಥವಾ ಆಚರಣೆಗಳನ್ನು ಆಯೋಜಿಸುವವರು ಅತೀ ಅವಶ್ಯಕತೆ ಇದ್ದಲ್ಲಿ ಮಾತ್ರ ಪೊಲೀಸ್ ಇಲಾಖೆಯಿಂದ ಪೂರ್ವ ಲಿಖಿತ ಅನುಮತಿ ಪಡೆದು, ನಿಗದಿತ ಮಿತಿಯೊಳಗಿನ ಶಬ್ದ ವ್ಯವಸ್ಥೆ ಬಳಸಬೇಕಾಗಿದೆ. ಶಬ್ದ ಮಾಲಿನ್ಯ ನಿಯಮಗಳನ್ನು ಪಾಲಿಸುವ ಕುರಿತು ಆಯೋಜಕರು ಲಿಖಿತ ಮುಚ್ಚಳಿಕೆ ಪತ್ರ ನೀಡುವುದು ಕಡ್ಡಾಯವಾಗಿದೆ.

ಆದೇಶವನ್ನು ಉಲ್ಲಂಘಿಸಿದಲ್ಲಿ ಕಾರ್ಯಕ್ರಮದ ಆಯೋಜಕರನ್ನೇ ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಎಚ್ಚರಿಸಿದ್ದಾರೆ.

ಇದನ್ನೂ ಓದಿ/ಸಾಮಾಜಿಕ ಜಾಲತಾಣದಲ್ಲಿ ‘ರೇಟ್ರೋ ಜಾದು’ ಕ್ರೇಜ್; 80ರ ದಶಕಕ್ಕೆ ಮರಳುತ್ತಿದೆ ನೆಟ್ಟಿಗರು!