ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಪಟ್ಟಣದಲ್ಲಿ ನಡೆದ ದನ ಕಳ್ಳತನ ಪ್ರಕರಣವೊಂದನ್ನು ಕುಮಟಾ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾದ ಕೇವಲ ನಾಲ್ಕು ದಿನಗಳೊಳಗಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಸೆ.10ರಂದು ಕುಮಟಾ ಪಟ್ಟಣದ ರೈಸ್ಮಿಲ್ ಪಕ್ಕದ ರಸ್ತೆಯಲ್ಲಿ ಮಲಗಿದ್ದ ದನವೊಂದನ್ನು ಹಿಡಿದು ಕಾರಿನಲ್ಲಿ ಹಾಕಿಕೊಂಡು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಕುರಿತು ಬಗ್ಗೋಣ ನಿವಾಸಿ ಹಾಗೂ ರೈಸ್ಮಿಲ್ನಲ್ಲಿ ಕೆಲಸ ಮಾಡುತ್ತಿರುವ ನಾಗೇಶ ಅವರು ನೀಡಿದ ದೂರಿನ ಮೇರೆಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.184/2026, ಬಿಎನ್ಎಸ್ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದರು. ಈ ತಂಡ 60ಕ್ಕೂ ಅಧಿಕ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿ, ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ನಡೆಸಿ ಪ್ರಕರಣ ದಾಖಲಾದ ನಾಲ್ಕು ದಿನಗಳೊಳಗೆ ಪ್ರಮುಖ ಆರೋಪಿಯಾಗಿರುವ ಮಹಮ್ಮದ್ ಶಬೀರ ಅಲಿಯಾಸ್ ಸಮೀರ್ ಗುರ್ಕಾ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಜಪೆಯಲ್ಲಿ ವಶಕ್ಕೆ ಪಡೆದಿದ್ದಾರೆ.
ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಮಾರುತಿ ಸುಜುಕಿ ಎರ್ಟಿಗಾ ಕಾರು (ಕೆಎ-20/ಎಂಸಿ-4268)ವನ್ನು ವಶಕ್ಕೆಪಡೆಯಲಾಗಿದೆ. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಕಾಪು, ಉಡುಪಿ ಜಿಲ್ಲೆಯ ಮಹಮ್ಮದ್ ಅಜೀಮ್ ಹಾಗೂ ಉಳ್ಳಾಲ, ಮಂಗಳೂರು ನಿವಾಸಿ ಜುಲ್ಲಾನ್ ಮಾಲಿಕ್ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಪ್ರಕರಣದ ಆರೋಪಿಗಳ ಪತ್ತೆಗೆ ಕುಮಟಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಯೋಗೇಶ ಕೆ.ಎಂ., ಪಿಎಸ್ಐಗಳಾದ ಖಾದರ್ ಬಾಷಾ, ರವಿ ಗುಡ್ಡಿ ಹಾಗೂ ವಿಠಲ ಮಲವಡಕರ ಮತ್ತು ಸಿಬ್ಬಂದಿಗಳಾದ ಗಣೇಶ ನಾಯ್ಕ, ದಯಾನಂದ ನಾಯ್ಕ, ಗುರು ನಾಯಕ ಹಾಗೂ ಕಿರಣ ನಾಯ್ಕ ಅವರು ಶ್ರಮಿಸಿದ್ದಾರೆ. ಉಡುಪಿ ಜಿಲ್ಲೆಯ ಅಪರಾಧ ವಿಭಾಗದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯೂ ಕಾರ್ಯಾಚರಣೆಗೆ ಸಹಕರಿಸಿದ್ದಾರೆ.
ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ-ಕೃಷ್ಣಮೂರ್ತಿ ಹಾಗೂ ಭಟ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾನು ಗುಪ್ತ ಅವರು ಕುಮಟಾ ಪೊಲೀಸರ ಕಾರ್ಯವನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ. ಪ್ರಕರಣವನ್ನು ಕ್ಷಿಪ್ರವಾಗಿ ಭೇದಿಸಿರುವ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ.

