ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ಹಬ್ಬದ ಸಂಭ್ರಮದ ನಡುವೆ ರಾಜ್ಯದ ವಿವಿಧೆಡೆ ಸಂಭವಿಸಿದ ಸರಣಿ ರಸ್ತೆ ಅಪಘಾತಗಳು ಹಲವು ಕುಟುಂಬಗಳಲ್ಲಿ ದುಃಖದ ವಾತಾವರಣ ನಿರ್ಮಿಸಿವೆ. ಮಂಡ್ಯ, ಬೆಳಗಾವಿ, ಚಾಮರಾಜನಗರ ಹಾಗೂ ಬೀದರ್ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ಹಲವು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಮಂಡ್ಯ: ಮದ್ದೂರು ತಾಲೂಕಿನ ಕೊಪ್ಪದಲ್ಲಿ ಹಬ್ಬ ಮುಗಿಸಿ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಬೈಕ್‌ನಲ್ಲಿ ತೆರಳುತ್ತಿದ್ದ ಕುಟುಂಬದ ವಾಹನಕ್ಕೆ ಹಿಂಬದಿಯಿಂದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಬೆಳಗಾವಿ: ಸವದತ್ತಿ ಪಟ್ಟಣದ ಹೊರವಲಯದಲ್ಲಿ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ಸವದತ್ತಿಯಿಂದ ಧಾರವಾಡದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಧಾರವಾಡದಿಂದ ಸವದತ್ತಿ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಧಾರವಾಡ ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೀಕ್ಷಿಸಿ ವಾಪಸ್ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದೆ ಎನ್ನಲಾಗಿದೆ. ವಿನೋದ ಹೊಗೆನ್ನವರ, ಆಕಾಶ್ ಜಾಧವ ಹಾಗೂ ರವಿ ಕುರುಬರ ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಧನಗೆರೆ ಮಾರ್ಗವಾಗಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪರಿಚಿತ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಮೃತ ವ್ಯಕ್ತಿಯ ದೇಹ ಛಿದ್ರಗೊಂಡಿದೆ. ಮೃತನ ಗುರುತು ಹಾಗೂ ಅಪಘಾತಕ್ಕೆ ಕಾರಣವಾದ ವಾಹನ ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀದರ್: ಬಸವಕಲ್ಯಾಣ ನಗರದ ಹುಲಸೂರು ರಸ್ತೆ ಸಮೀಪ ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗೌರ್ ತಾಂಡಾ ನಿವಾಸಿ ಪೂನಮ್ ಪವಾರ್ (50) ಮೃತ ಮಹಿಳೆ. ಸಂಬಂಧಿ ಅಂಕುಶ್ ಅವರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬಸವಕಲ್ಯಾಣದ ಅಡತ್ ಬಜಾರ್ ಬಳಿ ಯೂಟರ್ನ್ ತೆಗೆದುಕೊಳ್ಳುವಾಗ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿದ್ದ ಅಂಕುಶ್ ಹಾಗೂ ಸೋನಾಲಿ ಅವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಬಸವಕಲ್ಯಾಣ ಸಂಚಾರಿ ಠಾಣೆಯ ಪಿಎಸ್‌ಐ ಸಿದ್ದೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌ಒಟ್ಟಾರೆ, ಹಬ್ಬದ ಸಂಭ್ರಮದ ಬೆನ್ನಲ್ಲೇ ರಾಜ್ಯದ ವಿವಿಧೆಡೆ ಸಂಭವಿಸಿದ ಈ ಸರಣಿ ಅಪಘಾತಗಳು ವಾಹನ ಸವಾರರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮ ಪಾಲನೆಯ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿವೆ.