ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ : ಜಿಲ್ಲೆಯ ಹೆಮ್ಮೆಯ ಉತ್ಸವವಾದ ಕದಂಬೊತ್ಸವವನ್ನು ಏಪ್ರಿಲ್ 12 ಮತ್ತು 13 ರಂದು ಬನವಾಸಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅಧಿಕೃತವಾಗಿ ಘೋಷಣೆ ಮಾಡಿದರು.

ಶನಿವಾರ ಶಿರಸಿ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಂದಬೋತ್ಸವ ದಿನಾಂಕ ಘೋಷಣೆ ಮಾಡಲಾಯಿತು. ಶಾಸಕ ಶಿವರಾಮ ಹೆಬ್ಬಾರ್ ಮಾತನಾಡಿ, ಕದಂಬೊತ್ಸವದಲ್ಲಿ ರಾಷ್ಟ್ರ, ರಾಜ್ಯ ಮಟ್ಟದ ಮೇರು ಕಲಾವಿದರು ಮತ್ತು ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಳೆದ ಬಾರಿ ಅರ್ಜಿ ಹಾಕಿ ಅವಕಾಶ ದೊರೆಯದ ಕಲಾವಿದರಿಗೆ ಆದ್ಯತೆ ನೀಡಬೇಕು. ವಿವಿಧ ಸಮಿತಿಗಳ ರಚನೆಯಲ್ಲಿ ಜನಪ್ರತಿನಿಧಿಗಳನ್ನು ಸೇರಿಸಿಕೊಳ್ಳಬೇಕು.
ಕೆ.ಎಸ್.ಆರ್. ಟಿ.ಸಿ. ಮೂಲಕ ಸೂಕ್ತ ಸಾರಿಗೆ ವ್ಯವಸ್ಥೆ ಒದಗಿಸಬೇಕು.ಪೊಲೀಸ್ ಇಲಾಖೆ ಯಿಂದ ಅಗತ್ಯ ಭದ್ರತೆ ಒದಗಿಸಬೇಕು. ಒಟ್ಟಿನಲ್ಲಿ ಉತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.
ಈ ಬಾರಿಯ ಪಂಪ ಪ್ರಶಸ್ತಿಯನ್ನು ಕದಂಬೊತ್ಸವ ವೇದಿಕೆಯಲ್ಲಿಯೇ ನೀಡಲಾಗುವುದು ಎಂದರು.

ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಕದಂಬೊತ್ಸವ ಪ್ರತಿಯೊಬ್ಬರ ಉತ್ಸವವಾಗಬೇಕು. ಇದು ನಮ್ಮೆಲ್ಲರ ಉತ್ಸವ ಎಂಬ ಭಾವನೆಯಿಂದ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಕದಂಬೊತ್ಸವವನ್ನು ಯಶಸ್ವಿಗೊಳಿಸೋಣ ಎಂದರು.

ಕದಂಬೊತ್ಸವದ ಯಶಸ್ವಿ ಆಚರಣೆಗಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ ಕಾರ್ಯಕಾರಿ ಸಮಿತಿ, ಸ್ವಾಗತ ಸಮಿತಿ, ಹಣಕಾಸು ಸಮಿತಿ, ಪ್ರಚಾರ ಸಮಿತಿ, ಸಾಂಸ್ಕೃತಿಕ ಸಮಿತಿ, ವೇದಿಕೆ ಸಮಿತಿ, ವಸತಿ ಸಮಿತಿ, ಸಾರಿಗೆ ಸಮಿತಿ, ಕ್ರೀಡಾ ಸಮಿತಿ, ಆರೋಗ್ಯ ಸಮಿತಿ, ಉಟೋಪಚಾರ , ಭದ್ರತಾ ಸಮಿತಿ ಮುಂತಾದ ಸಮಿತಿಗಳನ್ನು ರಚಿಸಲಾಯಿತು.

ಸಭೆಯಲ್ಲಿ ಶಿರಸಿ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡರ್ , ಉಪ ವಿಭಾಗಾಧಿಕಾರಿ ಕಾವ್ಯರಾಣಿ ಹಾಗೂ ಬನವಾಸಿ ಗ್ರಾಮ ಪಂಚಾಯತ್ ಸೇರಿದಂತೆ ವಿವಿಧ ಗ್ರಾಮ ಪಂಚಾಯತ್ ಗಳ ಜನಪ್ರತಿನಿಧಿಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇದನ್ನೂ ಓದಿ